Skip to content

Freedom of the present | ಈ ನಡುವಿನ ಬಿಡುವು

ಅಳಿಸಲಾಗದ ಅಕ್ಷರವ ಬರೆಯಲಾಗದು!

Menu
  • Privacy Policy
Menu

Month: September 2008

ವಿರೋಧಿಗಳದ್ದೇ ‘ರಾಜ್ಯಭಾರ’ವಾದರೆ ಸರಕಾರವೇಕೆ?

Posted on September 23, 2008May 24, 2015 by Ismail

ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪನವನವರು ಅಧಿಕಾರ ಸ್ವೀಕರಿಸುವುದಕ್ಕೆ ಸರಿಯಾಗಿ ಹನ್ನೊಂದು ದಿನಗಳ ಮೊದಲು ಕರ್ನಾಟಕದಲ್ಲೊಂದು ಕಳ್ಳಭಟ್ಟಿ ದುರಂತ ಸಂಭವಿಸಿತು. ಕರ್ನಾಟಕದಲ್ಲೇ ನೂರಕ್ಕೂ ಹೆಚ್ಚು ಮಂದಿ ಬಲಿಯಾದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಯೋಜಿತ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಈ ಘಟನೆಯ ಹಿಂದೆ ತಮ್ಮ ವಿರೋಧಿಗಳ ಕೈವಾಡವನ್ನು ಸಂಶಯಿಸಿದ್ದರು. ಇದನ್ನವರು ಬೇರೆ ಬೇರೆ ರೀತಿಯಲ್ಲಿ ವ್ಯಕ್ತಪಡಿಸಿದ್ದರು. ಇದಕ್ಕೆ ತಕ್ಕಂತೆ ಸಾರಾಯಿ ನಿಷೇಧವನ್ನು ತೀವ್ರ ಟೀಕೆಗೆ ಒಳಪಡಿಸಿದ್ದ ಕಾಂಗ್ರೆಸ್‌ ನಾಯಕರಾದ ಜನಾರ್ದನ ಪೂಜಾರಿ, ವೀರಪ್ಪ ಮೊಯ್ಲಿಯವರಂಥ ಹೇಳಿಕೆಗಳೂ ಇದ್ದವು.

ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದ ಹತ್ತೇ ದಿನಗಳಲ್ಲಿ ಗೊಬ್ಬರ ಕೊರತೆಯಿಂದ ರೊಚ್ಚಿಗೆದ್ದು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗೋಲಿಬಾರ್‌ ನಡೆಯಿತು. ಗುಂಡು ತಗುಲಿದ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಈ ಸಂದರ್ಭದಲ್ಲಿಯೂ ಯಡಿಯೂರಪ್ಪನವರು ಸಂಶಯಿಸಿದ್ದು ವಿರೋಧಿ ಗಳ ಕೈವಾಡವನ್ನೇ. ಇದಕ್ಕೆ ತಕ್ಕಂತೆ ಕೇಂದ್ರ ಸರಕಾರ ಗೊಬ್ಬರ ಬಿಡುಗಡೆ ಮಾಡಿರಲಿಲ್ಲ. ಗೊಬ್ಬರದ ಲಾರಿಗಳನ್ನೇ ಹಿಡಿದು ನಿಲ್ಲಿಸುವಷ್ಟರ ಮಟ್ಟಿಗೆ ಪ್ರತಿಭಟನೆಗಳು ತೀವ್ರಗೊಂಡಿದ್ದವು. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವಷ್ಟು ಹಿಂಸಾತ್ಮಕ ಪ್ರತಿಭಟನೆಗಳೂ ನಡೆಯುತ್ತಿದ್ದವು.

ಸರಕಾರಕ್ಕೆ ನೂರು ದಿನ ತುಂಬಿದ ಕೆಲವೇ ದಿನಗಳಲ್ಲಿ ಕರ್ನಾಟಕದ ಬೇರೆ ಬೇರೆ ಕಡೆಗಳಲ್ಲಿ ಕ್ರೈಸ್ತರ ಪ್ರಾರ್ಥನಾ ಮಂದಿರಗಳ ಮೇಲೆ ತಥಾಕಥಿತ `ಹಿಂದೂ ಪರ’ ಸಂಘಟನೆಗಳು ದಾಳಿ ನಡೆಸಿದವು. ದಾವಣಗೆರೆಯಲ್ಲಿ ಆರಂಭಗೊಂಡ ಈ ದಾಳಿಯ ಸರಣಿ ಮಂಗಳೂರಿಗೆ ತಲುಪುವ ಹೊತ್ತಿಗೆ ಪಡೆದುಕೊಂಡ ಸ್ವರೂಪವೇ ಬೇರೆ. ಅಲ್ಲಿಯ ತನಕವೂ `ನ್ಯೂ ಲೈಫ್‌ ಫೆಲೋಷಿಪ್‌’ ಎಂಬ ಕ್ರೈಸ್ತ ಧರ್ಮ ಪ್ರಸಾರದ ಸಂಘಟನೆಗೆ ಸೇರಿದ ಪ್ರಾರ್ಥನಾ ಮಂದಿರಗಳ ಮೇಲೆ ನಡೆಯುತ್ತಿದ್ದ ದಾಳಿಗಳು ಕೆಥೋಲಿಕ್‌ ಕ್ರೈಸ್ತರ ಚರ್ಚ್‌ಗಳಿಗೂ ವ್ಯಾಪಿಸಿದವು. ಶಿಲುಬೆಯನ್ನು ಮುರಿಯುವ, ಯೇಸುವಿನ ಪ್ರತಿಮೆಯನ್ನು ಭಗ್ನಗೊಳಿಸುವ, ಪರಮಪ್ರಸಾದವನ್ನು ನಾಶಪಡಿಸುವ, ಗರ್ಭಿಣಿಯ ಮೇಲೆ ಹಲ್ಲೆ ಮಾಡುವ ಮಟ್ಟಕ್ಕೆ ಹೋದವು.
ಮಂಗಳೂರಿನಲ್ಲಿ ಕ್ರೈಸ್ತರು ಈ ದಾಳಿಗಳ ವಿರುದ್ಧ ಪ್ರತಿಭಟನೆ ಹಿಂಸಾತ್ಮಕ ಸ್ವರೂಪವನ್ನೂ ಪಡೆಯಿತು. ಈ ಹಿಂಸೆಗೆ ಪೊಲೀಸರೇ ಕಾರಣರು ಎಂಬ ವಾದ ಒಂದೆಡೆಗಿದ್ದರೆ ಪ್ರತಿಭಟನೆಕಾರರ ಹಿಂಸೆ ಪೊಲೀಸರನ್ನು ರೊಚ್ಚಿಗೆಬ್ಬಿಸಿತು ಎಂಬುದು ಮತ್ತೊಂದು ವಾದ. ದಕ್ಷಿಣ ಕನ್ನಡದ ಪೊಲೀಸರು ಕೋಮು ಸೂಕ್ಷ್ಮ ಪರಿಸ್ಥಿತಿಯನ್ನು ಈ ತನಕ ನಿರ್ವಹಿಸಿರುವುದನ್ನು ನೋಡಿದರೆ ತಪ್ಪು ಎರಡೂ ಕಡೆಯೂ ಇರಬಹು ದೆಂದು ಕಾಣಿಸುತ್ತದೆ. ಪರಿಸ್ಥಿತಿ ಹಿಂಸಾತ್ಮಕ ತಿರುವು ಪಡೆದುಕೊಳ್ಳುವ ವರೆಗೂ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳುವುದಿಲ್ಲ ಎಂಬುದು ಈವರೆಗಿನ ಅನೇಕ ಉದಾಹರಣೆಗಳಿಂದ ಸಾಬೀತಾಗಿದೆ.

Read more

ದೇಶ ಸ್ಫೋಟಿಸುವಾಗ ಸೂಟ್‌ ಬದಲಾಯಿಸಿದವರು!

Posted on September 16, 2008May 24, 2015 by Ismail

`ರೋಮ್‌ ಹೊತ್ತಿ ಉರಿಯುತ್ತಿದ್ದಾಗ ದೊರೆ ನೀರೋ ಪಿಟೀಲು ನುಡಿಸುತ್ತಿದ್ದ’ ಸಂಗತಿ ನಮಗೆಲ್ಲಾ ಗೊತ್ತಿದೆ. ನೀರೋ ಪಿಟೀಲು ನುಡಿಸುತ್ತಿದ್ದನೇ ಇಲ್ಲವೇ ಎಂಬುದರ ಬಗ್ಗೆ ಅನೇಕ ಚರ್ಚೆಗಳಿವೆ. ಕಾರಣ ಆಗ ಪಿಟೀಲು ಎಂಬ ವಾದ್ಯವೇ ಇರಲಿಲ್ಲ. ನಮ್ಮ ಈಗಿನ ಗಿಟಾರ್‌ನ ಮೂಲ ರೂಪವಾಗಿದ್ದ Lyre  ವಾದ್ಯವನ್ನು ನೀರೋ ನುಡಿಸುತ್ತಿದ್ದ ಎಂದು ರೋಮಿನ ಇತಿಹಾಸಕಾರರಲ್ಲಿ ಒಬ್ಬನಾಗಿರುವ ಕ್ಯಾಸಿಯಸ್‌ ಹೇಳಿದ್ದಾನೆ. ನೀರೋ ಪಿಟೀಲು ನುಡಿಸುತ್ತಿದ್ದನೇ ಇಲ್ಲವೇ ಎಂಬುದರಷ್ಟೇ ಮುಖ್ಯವಾದ ಮತ್ತೊಂದು ಪ್ರಶ್ನೆ ರೋಮ್‌ಗೆ ಬೆಂಕಿ ಹತ್ತಿಕೊಂಡದ್ದು ಹೇಗೆ ಎಂಬುದು? ಇದಕ್ಕೆ ಸಂಬಂಧಿಸಿದಂತೆ ಹಲವು ಅಭಿಪ್ರಾಯಗಳಿವೆ. ಕೆಲವರು ಇದನ್ನು ಒಂದು ಆಕಸ್ಮಿಕ ಎಂದು ಹೇಳಿದ್ದಾರೆ. ಇನ್ನು ಕೆಲವರು ಕ್ರೈಸ್ತರು ಬೆಂಕಿ ಹಚ್ಚಿದರು ಎನ್ನುತ್ತಾರೆ. ನೀರೋನ ಕಾಲದ ದಾಖಲೆಗಳನ್ನು ಇಟ್ಟುಕೊಂಡು ಈ ಬೆಂಕಿಗೂ ನೀರೋನೇ ಕಾರಣನಾಗಿದ್ದನೆಂದು ಕ್ಯಾಸಿಯಸ್‌ನಂಥ ಇತಿಹಾಸಕಾರರು ಅಭಿಪ್ರಾಯಪಡುತ್ತಾರೆ.

ನೀರೋ ಕಾಲದಲ್ಲಿ ಮನೆಗಳನ್ನು ಮರದಿಂದ ನಿರ್ಮಿಸಲಾಗುತ್ತಿತ್ತು. ಗೋಡೆಗಳೂ ಮರದದಿಂದಲೇ ರೂಪುಗೊಳ್ಳುತ್ತಿದ್ದವು. ಕ್ಯಾಸಿಯಸ್‌ ದಾಖಲಿಸಿರುವಂತೆ `ನಗರವನ್ನು ನಾಶಮಾಡುವ ಅಭೀಪ್ಸೆಯಿಂದ ಉತ್ತೇಜಿತನಾದ ನೀರೋ ಕುಡುಕರಂತೆ ನಟಿಸಿ ನಗರಕ್ಕೆ ಕೊಳ್ಳಿ ಇಡಲು ಜನರನ್ನು ಕಳುಹಿಸಿದ. ಪಾಲಾಟೈನ್‌ ಬೆಟ್ಟದ ಮೇಲಿದ್ದ ತನ್ನ ಅರಮನೆಯಲ್ಲಿ ಉರಿಯುವ ರೋಮ್‌ ಅನ್ನು ನೋಡುತ್ತಾ ನೀರೋ Lyre  ನುಡಿಸುತ್ತಾ ಹಾಡಿದ’.

Read more

ಭಯೋತ್ಪಾದನೆಯ ಮತ್ತೊಂದು ಮುಖ

Posted on September 7, 2008May 24, 2015 by Ismail

ಇತ್ತೀಚೆಗೆ ಬೆಂಗಳೂರು, ಅಹಮದಾಬಾದ್‌ಗಳಲ್ಲಿ ಸರಣಿ ಸ್ಫೋಟಗಳು ಸಂಭವಿಸಿದಾಗ ಅದಕ್ಕೆ ಸಂಬಂಧಿಸಿದಂತೆ ಬಂದ ಎರಡು ಮುಖ್ಯ ಪ್ರತಿಕ್ರಿಯೆಗಳ ಬಗ್ಗೆ ಹೆಚ್ಚಿನ ಚರ್ಚೆ ನಡೆಯಲಿಲ್ಲ. ಮೊದಲನೆಯದ್ದು ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್‌ ಅವರದ್ದು. ಸ್ಫೋಟಗಳೆಲ್ಲವೂ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೇ ನಡೆಯುತ್ತಿದೆ. ಸಂಸತ್‌ನಲ್ಲಿ ನಡೆದ ವೋಟಿಗಾಗಿ ನೋಟು ಹಗರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕಾಂಗ್ರೆಸ್‌ ಈ ಸ್ಫೋಟಗಳನ್ನು ಸಂಘಟಸಿದ್ದಿರಬೇಕು ಎಂಬ ಅರ್ಥದಲ್ಲಿ ಅವರು ಮಾತನಾಡಿದ್ದರು. ಈ ಪ್ರತಿಕ್ರಿಯೆ ಹೊರಬಿದ್ದ ದಿನವೇ ಸಫ್ದರ್‌ ಹಷ್ಮಿ ಮೆಮೋರಿಯಲ್‌ ಟ್ರಸ್ಟ್‌ನ ಶಬ್ನಂ ಹಶ್ಮಿ `ಪ್ರಭುತ್ವ ತನ್ನ ಉಳಿದೆಲ್ಲಾ ಸೇವೆಗಳನ್ನೂ ಖಾಸಗೀಕರಿಸಿರುವುದರಿಂದ ಅದಕ್ಕೆ ಉಳಿದಿರುವುದು ಭದ್ರತೆಯ ಕೆಲಸ ಮಾತ್ರ. ಇದನ್ನು ಜನರಿಗೆ ಆಗಾಗ ನೆನಪು ಮಾಡಿ ಕೊಡದೇ ಹೋದರೆ ಪ್ರಭುತ್ವವೇ ಅಪ್ರಸ್ತುತವಾಗಿಬಿಡುವ ಸಾಧ್ಯತೆ ಇದೆ. ಸರಣಿ ಸ್ಫೋಟಗಳನ್ನು ಈ ಹಿನ್ನೆಲೆಯಲ್ಲೂ ಅರ್ಥ ಮಾಡಿಕೊಳ್ಳಬೇಕಾದ ಅಗತ್ಯವಿದೆ’ ಎಂದಿದ್ದರು.

ನಗರ ಮಧ್ಯೆ ದೊಡ್ಡ ಪಟಾಕಿ ಸಿಡಿದರೂ ಅದರ ಹಿಂದೆ ಇಸ್ಲಾಮಿಕ್‌ ಭಯೋತ್ಪಾದನೆಯಿದೆ ಎಂದು ಹೇಳುವುದು ಬಿಜೆಪಿಗೆ ಅಭ್ಯಾಸವಾಗಿ ಹೋಗಿದೆ. ಅಂತಹ ಪಕ್ಷದ ಪ್ರಮುಖ ನಾಯಕಿಯೊಬ್ಬರು ಬಾಂಬ್‌ ಸ್ಫೋಟದ ಹಿಂದೆ ಮತ್ತೊಂದು ರಾಜಕೀಯ ಪಕ್ಷದ ಕೈವಾಡದ ಬಗ್ಗೆ ಆರೋಪಿಸಿದ್ದು ಸ್ವಲ್ಪ ಮಟ್ಟಿಗೆ ವಿಚಿತ್ರವಾಗಿಯೂ ವಿಶಿಷ್ಟವಾಗಿಯೂ ಇದೆ. ಅಷ್ಟೇ ಅಲ್ಲ ಅವರು ಸ್ಫೋಟಗಳನ್ನು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷವೇ ಮಾಡಿಸಲು ಕಾರಣವಾದ ಅಂಶದ ಬಗ್ಗೆಯೂ ಹೇಳಿದ್ದರು. ಆದರೆ ಅದನ್ನು ಸ್ವತಃ ಬಿಜೆಪಿ ಸೇರಿದಂತೆ ಯಾರೂ ಗಂಭೀರವಾಗಿ ಪರಿಗಣಿಸಲಿಲ್ಲ. ಮಾಧ್ಯಮಗಳೂ ಅಷ್ಟೇ. `ಸ್ಫೋಟಗಳ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಪಾಲಿಸಬೇಕಾದ ನೀತಿ ಸಂಹಿತೆ’ಯ ಬಗ್ಗೆಯಷ್ಟೇ ಮಾತನಾಡಿ ಸುಮ್ಮನಾಗಿಬಿಟ್ಟವು.

Read more

ಢಿಫ್ರೆಂಟ್ ಸಿನಿಮಾ ಮತ್ತು ಡಿಫ್ರೆಂಟ್ ಸರಕಾರ

Posted on September 1, 2008May 24, 2015 by Ismail

`ನೋಡಿ ಸಾರ್‌, ನಮ್ಮದು ಕಂಪ್ಲೀಟ್‌ ಡಿಫ್ರೆಂಟ್‌ ಸಿನಿಮಾ ಸಾರ್‌. ನಾವು ಇಡೀ ಕತೆಯನ್ನು ಡಿಫ್ರೆಂಟ್‌ ಆಗಿ ಪ್ರೆಸೆಂಟ್‌ ಮಾಡಿದ್ದೀವಿ. ತುಂಬಾನೆ ಡಿಫ್ರೆಂಟ್‌ ಕತೆ. ….ಅವ್ರ ಅಭಿಮಾನಿಗಳು ಎಂಜಾಯ್ ಮಾಡ್ತಾರೆ. ಯಂಗ್‌ಸ್ಟರ್ಸ್‌ಗೆ ಇಷ್ಟ ಆಗುತ್ತೆ. ಲೇಡೀಸ್‌ಗೂ ಇಷ್ಟ ಆಗುತ್ತೆ ಸಾರ್‌. ನೀವು ನೋಡ್ತಾ ಇರಿ ಸಾರ್‌. ಗ್ಯಾರಂಟಿ ಹಂಡ್ರೆಡ್‌ ಡೇಸ್‌.’

`ನಮ್ಮ ಪಕ್ಷ ಭಿನ್ನವಾದುದು. ಸಿದ್ಧಾಂತಗಳಿಗೆ ಬದ್ಧವಾದುದು. ಕಾಂಗ್ರೆಸ್ಸಿನ ಭ್ರಷ್ಟಾಚಾರ, ಜೆಡಿಎಸ್‌ನ ವಚನಭ್ರಷ್ಟತೆ ಸಂಸ್ಕೃತಿ ನಮ್ಮದಲ್ಲ. ನಮ್ಮದು ರಾಷ್ಟ್ರೀಯವಾದಿ ಪಕ್ಷ. ನಾವು ಅಧಿಕಾರಕ್ಕೆ ಬಂದರೆ ಖಂಡಿತವಾಗಿಯೂ ಪೂರ್ಣ ಅವಧಿಗೆ ಸ್ಥಿರ ಸರಕಾರವನ್ನು ನೀಡುತ್ತೇವೆ. ರೈತರಿಗೆ ಉಚಿತ ವಿದ್ಯುತ್‌ ನೀಡುತ್ತೇವೆ. ವಿದ್ಯುತ್‌ ಬಾಕಿಯನ್ನು ಮನ್ನಾ ಮಾಡುತ್ತೇವೆ. ಬಡತನ ರೇಖೆಗೆ ನಿಗದಿ ಪಡಿಸಿರುವ ಆದಾಯದ ಮಿತಿಯನ್ನು 11,800ರಿಂದ 30,000 ರೂಪಾಯಿಗಳಿಗೆ ಏರಿಸುತ್ತೇವೆ. ಕರ್ನಾಟಕದ ಎಲ್ಲ ಸಮಸ್ಯೆಗಳಿಗೂ ಬಿಜೆಪಿಯೇ ಪರಿಹಾರ’

ಮೇಲಿನ ಎರಡೂ ಹೇಳಿಕೆಗಳ ಮಧ್ಯೆ ಏನಾದರೂ ವ್ಯತ್ಯಾಸವಿದೆಯೇ? ಗಾಂಧಿನಗರಿಗರು ಹೇಳುವ ಕಂಪ್ಲೀಟ್‌ ಡಿಫ್ರೆಂಟ್‌ ಸಿನಿಮಾ ಎಂಬುದು ತಮಿಳಿನಿಂದಲೋ ತೆಲುಗಿನಿಂದಲೋ ಕದ್ದ ಸರಕನ್ನಷ್ಟೇ ಹೊಂದಿರುತ್ತದೆ. ಇದನ್ನು ಯಾರಾದರೂ ಪ್ರಶ್ನಿಸಿದರೆ ತಕ್ಷಣ ಗಾಂಧಿನಗರ ಉತ್ತರ ಕೊಡುತ್ತದೆ. `ಜಗತ್ತಿನಲ್ಲಿ ಇರುವುದೇ ಒಂಬತ್ತು ಕತೆಗಳು. ಅದನ್ನೇ ಡಿಫ್ರೆಂಟ್‌ ಆಗಿ ಹೇಳುವುದಷ್ಟೇ ನಮ್ಮ ಕೆಲಸ. ಹೊಸ ಕತೆ ಎಂಬುದೊಂದಿಲ್ಲ.’

Read more
September 2008
M T W T F S S
1234567
891011121314
15161718192021
22232425262728
2930  
« Aug   Oct »
  • December 2017
  • November 2017
  • March 2017
  • February 2017
  • January 2017
  • June 2014
  • March 2010
  • June 2009
  • May 2009
  • April 2009
  • March 2009
  • February 2009
  • January 2009
  • October 2008
  • September 2008
  • August 2008
  • July 2008
  • May 2008
  • April 2008
  • March 2008
  • February 2008
  • January 2008
  • December 2007
  • November 2007
  • September 2007
  • August 2007
  • July 2007
  • April 2007
  • January 2007
  • December 2006
  • October 2006
  • September 2006
  • May 2006
  • ಪ್ರಜೆಗಳನ್ನು ಬೆತ್ತಲಾಗಿಸುವ ಅಪಾರದರ್ಶಕ ಪ್ರಭುತ್ವ
  • ಇಂಟರ್‌ನೆಟ್ ಇಲ್ಲದ ಡಿಜಿಟಲ್ ಆರ್ಥಿಕತೆ!
  • ನೋಟು ರದ್ದತಿಯಲ್ಲಿ ಕಂಡ ಡಿಜಿಟಲ್ ಡಿವೈಡ್
  • ಮಾಧ್ಯಮ ನಿಯಂತ್ರಣದ ‘ಭದ್ರತಾ’ ತಂತ್ರಗಳು
  • ಒಮ್ಮುಖ ಪಾರದರ್ಶಕತೆಯ ತಂತ್ರಜ್ಞಾನಾಧಾರಿತ ಪ್ರಭುತ್ವ
  • ಇ-ಹೊತ್ತು ಅಂಕಣ
  • ಒಂಟಿದನಿ (ಉದಯವಾಣಿ ಅಂಕಣ)
  • ಟಿಪ್ಪಣಿ
  • ಪ್ರಜಾವಾಣಿ
  • ಬಿಡಿ ಬರಹಗಳು
  • Privacy Policy
© 2023 Freedom of the present | ಈ ನಡುವಿನ ಬಿಡುವು | Powered by Superbs Personal Blog theme