`ನೋಡಿ ಸಾರ್, ನಮ್ಮದು ಕಂಪ್ಲೀಟ್ ಡಿಫ್ರೆಂಟ್ ಸಿನಿಮಾ ಸಾರ್. ನಾವು ಇಡೀ ಕತೆಯನ್ನು ಡಿಫ್ರೆಂಟ್ ಆಗಿ ಪ್ರೆಸೆಂಟ್ ಮಾಡಿದ್ದೀವಿ. ತುಂಬಾನೆ ಡಿಫ್ರೆಂಟ್ ಕತೆ. ….ಅವ್ರ ಅಭಿಮಾನಿಗಳು ಎಂಜಾಯ್ ಮಾಡ್ತಾರೆ. ಯಂಗ್ಸ್ಟರ್ಸ್ಗೆ ಇಷ್ಟ ಆಗುತ್ತೆ. ಲೇಡೀಸ್ಗೂ ಇಷ್ಟ ಆಗುತ್ತೆ ಸಾರ್. ನೀವು ನೋಡ್ತಾ ಇರಿ ಸಾರ್. ಗ್ಯಾರಂಟಿ ಹಂಡ್ರೆಡ್ ಡೇಸ್.’
`ನಮ್ಮ ಪಕ್ಷ ಭಿನ್ನವಾದುದು. ಸಿದ್ಧಾಂತಗಳಿಗೆ ಬದ್ಧವಾದುದು. ಕಾಂಗ್ರೆಸ್ಸಿನ ಭ್ರಷ್ಟಾಚಾರ, ಜೆಡಿಎಸ್ನ ವಚನಭ್ರಷ್ಟತೆ ಸಂಸ್ಕೃತಿ ನಮ್ಮದಲ್ಲ. ನಮ್ಮದು ರಾಷ್ಟ್ರೀಯವಾದಿ ಪಕ್ಷ. ನಾವು ಅಧಿಕಾರಕ್ಕೆ ಬಂದರೆ ಖಂಡಿತವಾಗಿಯೂ ಪೂರ್ಣ ಅವಧಿಗೆ ಸ್ಥಿರ ಸರಕಾರವನ್ನು ನೀಡುತ್ತೇವೆ. ರೈತರಿಗೆ ಉಚಿತ ವಿದ್ಯುತ್ ನೀಡುತ್ತೇವೆ. ವಿದ್ಯುತ್ ಬಾಕಿಯನ್ನು ಮನ್ನಾ ಮಾಡುತ್ತೇವೆ. ಬಡತನ ರೇಖೆಗೆ ನಿಗದಿ ಪಡಿಸಿರುವ ಆದಾಯದ ಮಿತಿಯನ್ನು 11,800ರಿಂದ 30,000 ರೂಪಾಯಿಗಳಿಗೆ ಏರಿಸುತ್ತೇವೆ. ಕರ್ನಾಟಕದ ಎಲ್ಲ ಸಮಸ್ಯೆಗಳಿಗೂ ಬಿಜೆಪಿಯೇ ಪರಿಹಾರ’
ಮೇಲಿನ ಎರಡೂ ಹೇಳಿಕೆಗಳ ಮಧ್ಯೆ ಏನಾದರೂ ವ್ಯತ್ಯಾಸವಿದೆಯೇ? ಗಾಂಧಿನಗರಿಗರು ಹೇಳುವ ಕಂಪ್ಲೀಟ್ ಡಿಫ್ರೆಂಟ್ ಸಿನಿಮಾ ಎಂಬುದು ತಮಿಳಿನಿಂದಲೋ ತೆಲುಗಿನಿಂದಲೋ ಕದ್ದ ಸರಕನ್ನಷ್ಟೇ ಹೊಂದಿರುತ್ತದೆ. ಇದನ್ನು ಯಾರಾದರೂ ಪ್ರಶ್ನಿಸಿದರೆ ತಕ್ಷಣ ಗಾಂಧಿನಗರ ಉತ್ತರ ಕೊಡುತ್ತದೆ. `ಜಗತ್ತಿನಲ್ಲಿ ಇರುವುದೇ ಒಂಬತ್ತು ಕತೆಗಳು. ಅದನ್ನೇ ಡಿಫ್ರೆಂಟ್ ಆಗಿ ಹೇಳುವುದಷ್ಟೇ ನಮ್ಮ ಕೆಲಸ. ಹೊಸ ಕತೆ ಎಂಬುದೊಂದಿಲ್ಲ.’