ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಂಕೇತಿಕವಾದ ಕ್ರಿಯೆಗಳಿಗೂ ಒಂದು ಮಹತ್ವವಿದೆ. ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿ ಖುದ್ದಾಗಿ ಪರಿಶೀಲಿಸಲು ಹೊರಡುವುದರಿಂದ ಆರಂಭಿಸಿ ರಾಜಧಾನಿಯ ಹೊರಗೆ ಸಂಪುಟ ಸಭೆ ಮತ್ತು ವಿಧಾನಸಭಾ ಅಧಿವೇಶನಗಳನ್ನು ನಡೆಸುವ ತನಕದ ಅನೇಕ ಕೆಲಸಗಳು ಈ ಸಾಂಕೇತಿಕ ಕ್ರಿಯೆಗಳ ಪರಿಧಿಯಲ್ಲಿ ಬರುತ್ತವೆ. ಚಾಮರಾಜ
ನಗರಕ್ಕೆ ಭೇಟಿ ನೀಡಿದವರೆಲ್ಲಾ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಭ್ರಮೆ ವ್ಯಾಪಕವಾಗಿರುವಾಗ ಮುಖ್ಯಮಂತ್ರಿಯೊಬ್ಬ ಚಾಮರಾಜ ನಗರಕ್ಕೆ ಭೇಟಿ ನೀಡುವುದು ನಿಜಕ್ಕೂ ಮುಖ್ಯವಾಗುತ್ತದೆ. ರಾಜಧಾನಿಯಿಂದ ದೂರವಿರುವ ಪ್ರದೇಶವೊಂದು ಅಭಿವೃದ್ಧಿಯಿಂದಲೂ ದೂರವಿದ್ದಾಗ ಅಲ್ಲೊಂದು ವಿಧಾನಸಭಾ ಅಧಿವೇಶನ ನಡೆಸುವುದು ಇಲ್ಲವೇ ಸಂಪುಟ ಸಭೆಯನ್ನು
ನಡೆಸುವುದು ಬಹಳ ಮುಖ್ಯವಾಗುತ್ತದೆ. ಸರ್ಕಾರ ತಮ್ಮ ಬಳಿಗೆ ಬಂತು ಎಂಬ ಭರವಸೆಯನ್ನು ಆ ಪ್ರದೇಶದ ಜನರಲ್ಲಿ ಮೂಡಿಸುವುದಕ್ಕೆ ಈ ಸಾಂಕೇತಿಕ ಕ್ರಿಯೆ ಸಹಾಯ ಮಾಡುತ್ತದೆ.