ಫೆಬ್ರವರಿ 18ರಂದು ಬೆಂಗಳೂರಿನ ಮಾಣಿಕ್ಯವೇಲು ಮ್ಯಾನ್ಷನ್ನಲ್ಲಿ ನಡೆದ ರಾಷ್ಟ್ರೀಯ ಆಧುನಿಕ ಕಲಾ ಗ್ಯಾಲರಿಯ ಉದ್ಘಾಟನಾ ಸಮಾರಂಭದಲ್ಲಿ ಸಚಿವರೊಬ್ಬರು ನೀಡಿದ ಆದೇಶ ಹೀಗಿತ್ತು. `ಗವರ್ನ್ಮೆಂಟ್ ಈಸ್ ಸ್ಪೀಕಿಂಗ್ ಹಿಯರ್. ಪುಲ್ ದೆಮ್ ಔಟ್ ಐ ಸೇ’. (ಇಲ್ಲಿ ಸರ್ಕಾರ ಮಾತನಾಡುತ್ತಿದೆ. ನಾನು ಹೇಳುತ್ತಿದ್ದೇನೆ ಅವರನ್ನು ಹೊರಗೆ ಹಾಕಿ). ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು `ನನ್ನ ಸರ್ಕಾರ’ ಎಂದು ಮಾತನಾಡುವುದನ್ನು ನಾವು ಕೇಳಿದ್ದೇವೆ. ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರು ಓದುವ ಆಡಳಿತಾರೂಢ ರಾಜಕೀಯ ಪಕ್ಷಗಳು ಸಿದ್ಧಪಡಿಸಿದ ಭಾಷಣದಲ್ಲಿ `ನನ್ನ ಸರ್ಕಾರ’ ಎಂಬ ಪ್ರಯೋಗವಿರುತ್ತದೆ. ಆದರೆ ಮಂತ್ರಿಗಳು, ಶಾಸಕರು, ಸಂಸದರು ಈ ಬಗೆಯ ಪ್ರಯೋಗ ಮಾಡಿದ್ದು ಸ್ವಾತಂತ್ರ್ಯೋತ್ತರ ಭಾರತದ ಇತಿಹಾಸದಲ್ಲೆಲ್ಲೂ ದಾಖಲಾಗಿಲ್ಲ.
ರಾಜ್ಯಪಾಲ, ರಾಷ್ಟ್ರಪತಿಗಳಂಥವರು `ನನ್ನ ಸರ್ಕಾರ’ ಎಂಬ ಪ್ರಯೋಗವನ್ನು ಬಳಸುತ್ತಾರೆಯೇ ಹೊರತು ಇವರ್ಯಾರೂ `ನಾನೇ ಸರ್ಕಾರ’ ಎಂದು ಹೇಳಿದ್ದಂತೂ ಇಲ್ಲವೇ ಇಲ್ಲ. ಹೀಗೆ `ನಾನೇ ಸರ್ಕಾರ’ ಎಂದು ಹೇಳಿದವನಿದ್ದರೆ ಅವನು 17ನೇ ಶತಮಾನದ ಫ್ರೆಂಚ್ ದೊರೆ ಹದಿನಾಲ್ಕನೇ ಲೂಯಿ. ಅವನು ಸಂಸತ್ ಸ್ವಯಂಪ್ರೇರಣೆಯಿಂದ ಸಭೆ ಸೇರುವುದರಿಂದ ವಿಚಲಿತನಾಗಿ `l’etat C’est moi'(ನಾನೇ ಪ್ರಭುತ್ವ ಅಥವಾ ನಾನೇ ಸರ್ಕಾರ) ಎಂದು ಕಿರುಚಿದ್ದನಂತೆ.
ಜನವರಿ 29ರಂದು ಕರ್ನಾಟಕದ ಭ್ರಷ್ಟಾಚಾರದ ಇತಿಹಾಸದಲ್ಲಿ ಮೂರು ಪ್ರಮುಖ ಘಟನೆಗಳು ಸಂಭವಿಸಿದವು. ಮೊದಲನೆಯದ್ದು ಇದೇ ಮೊದಲ ಬಾರಿಗೆ ಶಾಸಕನೊಬ್ಬ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು. ಎರಡನೆಯದ್ದು ಶುದ್ಧ ಹಸ್ತದ ರಾಜಕಾರಣಿ ಎಂದೇ ಎಲ್ಲರೂ ಗುರುತಿಸುವ ಸಿದ್ದರಾಮಯ್ಯನವರು `ಎಲ್ಲರೂ ಭ್ರಷ್ಟರೇ ದುರದೃಷ್ಟವಶಾತ್ ಈತ ಸಿಕ್ಕಿಬಿದ್ದಿದ್ದಾನೆ’ ಎಂದು ಇದಕ್ಕೆ ಪ್ರತಿಕ್ರಿಯಿಸಿದ್ದು. ಈ ಪ್ರತಿಕ್ರಿಯೆಗೆ 225 ಮಂದಿ ವಿಧಾನಸಭೆ ಸದಸ್ಯರು ಮತ್ತು 75 ಮಂದಿ ವಿಧಾನ ಪರಿಷತ್ತಿನ ಸದಸ್ಯರಲ್ಲಿ ಯಾರೊಬ್ಬರೂ ವಿರೋಧ ವ್ಯಕ್ತಪಡಿಸದೇ ಇದ್ದದ್ದು. ಮತ್ತು ಲೋಕಾಯುಕ್ತ ಕಚೇರಿಗೆ ಶಾಸಕರ ದಂಡೊಂದು ನುಗ್ಗಿ ಬಂಧಿತ ಶಾಸಕ ವೈ ಸಂಪಂಗಿಯನ್ನು ಜಾಮೀನಿನ ಮೇಲೆ ತಕ್ಷಣ ಬಿಡುಗಡೆ ಮಾಡಬೇಕೆಂದು ರಂಪಾಟ ನಡೆಸಿದ್ದು. ಈ ಮೂರು ಘಟನೆಗಳು ಭ್ರಷ್ಟಾಚಾರದ ಸ್ವರೂಪವನ್ನು ವಿವರಿಸುತ್ತಿವೆ.