ಇದು 1985ರ ಬಿಹಾರ ಕೇಡರ್ನ ಐಎಎಸ್ ಅಧಿಕಾರಿಯೊಬ್ಬರು ಹೇಳಿದ ಕತೆ.
`ನಾನು ಸೇವೆಗೆ ಸೇರಿದ ಹೊಸತರಲ್ಲಿ ನನ್ನ ಮನೆಯಿಂದ ಕೆಲ ವಸ್ತುಗಳು ಕಳವಾದವು. ಪೊಲೀಸರಿಗೆ ದೂರು ನೀಡಿದೆ. ತನಿಖೆ ಆರಂಭವಾಯಿತು. ನಾನು ಸಮಯಸಿಕ್ಕಾಗಲೆಲ್ಲಾ ಠಾಣೆಗೆ ಹೋಗಿ ನನ್ನ ದೂರಿನ ಕುರಿತು ವಿಚಾರಿಸುತ್ತಿದ್ದೆ. ಪ್ರತೀ ಬಾರಿ ಹೋದಾಗಲೂ ಪೊಲೀಸರು `ಇನ್ವೆಸ್ಟಿಗೇಷನ್ ಮಾಡುತ್ತಿದ್ದೇವೆ ಸಾರ್’ ಎಂದು ಯಾರಾದರೊಬ್ಬನಿಗೆ ಥಳಿಸುತ್ತಿರುತ್ತಿದ್ದರು. `ನಾನು ಠಾಣೆಗೆ ಹೋದ ದಿನ ನನ್ನನ್ನು ಮೆಚ್ಚಿಸುವುಕ್ಕೋ ಎಂಬಂತೆ ಅವರ ಥಳಿತದ ತೀವ್ರತೆಯೂ ಹೆಚ್ಚಾಗುತ್ತಿತ್ತು. ಪ್ರತೀ ಬಾರಿ ಠಾಣೆಗೆ ಹೋದಾಗಲೂ ಹೊಸ ಹೊಸ `ಆರೋಪಿ’ಗಳಿಗೆ ಪೊಲೀಸರು ಥಳಿಸುತ್ತಿದ್ದರೇ ಹೊರತು ಕಳವಾದ ವಸ್ತುಗಳ ಕುರಿತು ಯಾವ ಸುಳಿವೂ ಅವರಿಗೆ ಸಿಕ್ಕಿರಲಿಲ್ಲ. ಈ ಥಳಿಸುವಿಕೆಯನ್ನು ನೋಡಲಾಗದೆ ನಾನು ಕಳವಾದ ವಸ್ತುಗಳ ಆಸೆಯನ್ನೇ ಬಿಟ್ಟೆ’
ಇದು ಭಾರತೀಯ ಪೊಲೀಸ್ ವ್ಯವಸ್ಥೆಯ ಒಂದು ಸಣ್ಣ ಸ್ಯಾಂಪಲ್. ನಮ್ಮ ಪೊಲೀಸರ ಮಟ್ಟಿಗೆ ತನಿಖೆ ನಡೆಸುವುದೆಂದರೆ ಥಳಿಸುವುದು ಎಂದರ್ಥ.
***
ಕಳೆದ ತಿಂಗಳ (ಫೆಬ್ರವರಿ 2009) 27ರಂದು ಬೆಂಗಳೂರಿನ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರ ಸುಮಾರು 34,000 ರೂಪಾಯಿ ಬೆಲೆಬಾಳುವ ಮೊಬೈಲ್ ಫೋನ್ ಒಂದು ಕಳವಾಯಿತು. ಈಗ ಮೊಬೈಲ್ ಫೋನ್ ಕಳವಾದರೆ ಅದನ್ನು ಪತ್ತೆ ಹಚ್ಚುವುದು ಸುಲಭ. ಕಳೆದು ಹೋದ ಮೊಬೈಲ್ ಫೋನ್ನ ಐಎಂಇಐ ಸಂಖ್ಯೆ ಅಥವಾ ಇಂಟರ್ ನ್ಯಾಷನಲ್ ಮೊಬೈಲ್ ಎಕ್ವಿಪ್ಮೆಂಟ್ ಐಡೆಂಟಿಟಿ ನಂಬರ್ ಅನ್ನು ಪೊಲೀಸರಿಗೆ ಕೊಟ್ಟರೆ ಸಾಕು. ಕಳೆದು ಹೋದ ಮೊಬೈಲ್ ಎಲ್ಲಿ ಬಳಕೆಯಾಗುತ್ತಿದ್ದರೂ ಅದನ್ನು ಪತ್ತೆ ಹಚ್ಚಬಹುದು. ಫೋನ್ ಕಳೆದುಕೊಂಡ ಸಾಫ್ಟ್ವೇರ್ ಇಂಜಿನಿಯರ್ ಜೆ.ಪಿ.ನಗರ ಪೊಲೀಸರಿಗೆ ದೂರು ನೀಡುವಾಗ ತಮ್ಮ ಐಎಂಇಐ ಸಂಖ್ಯೆಯನ್ನೂ ತಿಳಿಸಿದ್ದರು.
ಕಳೆದ ಎರಡು ವರ್ಷಗಳಲ್ಲಿ ಬಿಹಾರದಿಂದ ಆರಂಭಿಸಿ ಕರ್ನಾಟಕದ ಹಾಸನದ ತನಕ ದಿಡೀರ್ ನ್ಯಾಯದಾನದ ಹಲವು ಪ್ರಕರಣಗಳನ್ನು ನಾವು ಮಾಧ್ಯಮಗಳಲ್ಲಿ ಓದಿ ತಿಳಿದಿದ್ದೇವೆ. ಎರಡು ವರ್ಷಗಳ ಹಿಂದೆ ಬಿಹಾರದ ವೈಶಾಲಿ ಜಿಲ್ಲೆಯ ಧೆಲ್ಫೋರ್ವಾ ಗ್ರಾಮದಲ್ಲಿ ಕಳವು ಆರೋಪಿಯೊಬ್ಬನನ್ನು ಬೀದಿಯಲ್ಲೇ ಭೀಕರವಾಗಿ ಥಳಿಸಿದ್ದು ಟಿ.ವಿ.ಚಾನೆಲ್ಗಳಲ್ಲಿ ಹಲವಾರು ಬಾರಿ ಪ್ರಸಾರವಾಗಿತ್ತು.