Freedom of the present | ಈ ನಡುವಿನ ಬಿಡುವು

Menu
  • Privacy Policy
Menu

ಹದಿನಾಲ್ಕನೇ ಲೂಯಿಯೂ ರಾಮಚಂದ್ರೇಗೌಡರೂ

Posted on February 24, 2009May 24, 2015 by admin

ಫೆಬ್ರವರಿ 18ರಂದು ಬೆಂಗಳೂರಿನ ಮಾಣಿಕ್ಯವೇಲು ಮ್ಯಾನ್ಷನ್‌ನಲ್ಲಿ ನಡೆದ ರಾಷ್ಟ್ರೀಯ ಆಧುನಿಕ ಕಲಾ ಗ್ಯಾಲರಿಯ ಉದ್ಘಾಟನಾ ಸಮಾರಂಭದಲ್ಲಿ ಸಚಿವರೊಬ್ಬರು ನೀಡಿದ ಆದೇಶ ಹೀಗಿತ್ತು. `ಗವರ್ನ್‌ಮೆಂಟ್‌ ಈಸ್‌ ಸ್ಪೀಕಿಂಗ್‌ ಹಿಯರ್‌. ಪುಲ್‌ ದೆಮ್‌ ಔಟ್‌ ಐ ಸೇ’. (ಇಲ್ಲಿ ಸರ್ಕಾರ ಮಾತನಾಡುತ್ತಿದೆ. ನಾನು ಹೇಳುತ್ತಿದ್ದೇನೆ ಅವರನ್ನು ಹೊರಗೆ ಹಾಕಿ). ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು `ನನ್ನ ಸರ್ಕಾರ’ ಎಂದು ಮಾತನಾಡುವುದನ್ನು ನಾವು ಕೇಳಿದ್ದೇವೆ. ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರು ಓದುವ ಆಡಳಿತಾರೂಢ ರಾಜಕೀಯ ಪಕ್ಷಗಳು ಸಿದ್ಧಪಡಿಸಿದ ಭಾಷಣದಲ್ಲಿ `ನನ್ನ ಸರ್ಕಾರ’ ಎಂಬ ಪ್ರಯೋಗವಿರುತ್ತದೆ. ಆದರೆ ಮಂತ್ರಿಗಳು, ಶಾಸಕರು, ಸಂಸದರು ಈ ಬಗೆಯ ಪ್ರಯೋಗ ಮಾಡಿದ್ದು ಸ್ವಾತಂತ್ರ್ಯೋತ್ತರ ಭಾರತದ ಇತಿಹಾಸದಲ್ಲೆಲ್ಲೂ ದಾಖಲಾಗಿಲ್ಲ. 

ರಾಜ್ಯಪಾಲ, ರಾಷ್ಟ್ರಪತಿಗಳಂಥವರು `ನನ್ನ ಸರ್ಕಾರ’ ಎಂಬ ಪ್ರಯೋಗವನ್ನು ಬಳಸುತ್ತಾರೆಯೇ ಹೊರತು ಇವರ್ಯಾರೂ `ನಾನೇ ಸರ್ಕಾರ’ ಎಂದು ಹೇಳಿದ್ದಂತೂ ಇಲ್ಲವೇ ಇಲ್ಲ. ಹೀಗೆ `ನಾನೇ ಸರ್ಕಾರ’ ಎಂದು ಹೇಳಿದವನಿದ್ದರೆ ಅವನು 17ನೇ ಶತಮಾನದ ಫ್ರೆಂಚ್‌ ದೊರೆ ಹದಿನಾಲ್ಕನೇ ಲೂಯಿ. ಅವನು ಸಂಸತ್‌ ಸ್ವಯಂಪ್ರೇರಣೆಯಿಂದ ಸಭೆ ಸೇರುವುದರಿಂದ ವಿಚಲಿತನಾಗಿ `l’etat C’est moi'(ನಾನೇ ಪ್ರಭುತ್ವ ಅಥವಾ ನಾನೇ ಸರ್ಕಾರ) ಎಂದು ಕಿರುಚಿದ್ದನಂತೆ.

Read more

ಕಾನೂನು ಕೈಗೆತ್ತಿಕೊಳ್ಳುವುದೆಂದರೆ…

Posted on February 10, 2009May 24, 2015 by admin

 

 

ಮಂಗಳೂರಿನಲ್ಲಿ ಜನವರಿ 23ರಂದು ಪಬ್‌ ಒಂದರ ಮೇಲೆ ನಡೆದ ದಾಳಿಯ ನಂತರ `ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ನಾವು ಸಹಿಸುವುದಿಲ್ಲ’ ಎಂಬ ಹೇಳಿಕೆಯೊಂದನ್ನು ಕರ್ನಾಟಕದ ಅಧಿಕಾರಾರೂಢ ರಾಜಕಾರಣಿಗಳು ಬಹಳಷ್ಟು ಬಾರಿ ನೀಡಿದ್ದಾರೆ. ಈ ಹೇಳಿಕೆಗಳನ್ನು ನೀಡಿದವರಾಗಲೀ ಅದನ್ನು ಕೇಳಿಸಿಕೊಂಡ ನಾವಾಗಲೀ `ಕಾನೂನನ್ನು ಕೈಗೆತ್ತಿಕೊಳ್ಳುವುದು’ ಎಂಬ ಪರಿಕಲ್ಪನೆಯ ಅರ್ಥವೇನು ಎಂಬ ಬಗ್ಗೆ ಯೋಚಿಸಿಲ್ಲ.

ಜನರು ಕಾನೂನನ್ನು ಕೈಗೆತ್ತಿಕೊಳ್ಳುವುದಕ್ಕೆ ಒಂದು ಸರಳ ಮತ್ತು ಸಾಮಾನ್ಯ ಉದಾಹರಣೆ ಯಾವುದು? ಸಾರ್ವಜನಿಕ ಸ್ಥಳವೊಂದರಲ್ಲಿ ಜೇಬುಗಳ್ಳನೊಬ್ಬ ಮಾಲು ಸಮೇತ ಸಿಕ್ಕಿಬೀಳುವುದನ್ನು ಇಂಥದ್ದೊಂದು ಸಂದರ್ಭವೆಂದು ಪರಿಗಣಿಸಬಹುದೇನೋ. ಜೇಬುಗಳ್ಳ ಸಿಕ್ಕಿಬಿದ್ದ ತಕ್ಷಣ ಅವನನ್ನು ಹಿಡಿದವರು ಪೊಲೀಸರನ್ನು ಕರೆಯುವ ಗೋಜಿಗೆ ಹೋಗುವುದಿಲ್ಲ. ಬದಲಿಗೆ ಅಲ್ಲಿದ್ದವರೆಲ್ಲಾ ತಮ್ಮ ಪಾಲಿನ ಶಿಕ್ಷೆಯನ್ನು ಆತನಿಗೆ ನೀಡುತ್ತಾರೆ. ಹೀಗೆ ಸಿಕ್ಕಿಬಿದ್ದವರು `ಸಾರ್ವಜನಿಕರ ಆಕ್ರೋಶ’ಕ್ಕೆ ಬಲಿಯಾಗಿ ಪ್ರಾಣ ಕಳೆದುಕೊಂಡದ್ದೂ ಇದೆ.ಜೇಬುಗಳ್ಳನನ್ನು ಪೊಲೀಸರಿಗೆ ಒಪ್ಪಿಸಿ, ಪೊಲೀಸರು ಅವನ ಮೇಲೊಂದು ಕೇಸು ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿ ಶಿಕ್ಷೆ ಕೊಡುವುದು ಕಾನೂನು ಬದ್ಧವಾದ ಹಾದಿ. ಇದನ್ನು ಕೈಬಿಟ್ಟು ವಿಚಾರಣೆಯೇ ಇಲ್ಲದೇ ಶಿಕ್ಷೆ ನೀಡುವ `ಗುಂಪು ನ್ಯಾಯ’ವನ್ನು ಕಾನೂನು ಕೈಗೆತ್ತಿಕೊಳ್ಳುವುದರ ಉದಾಹರಣೆಯೆನ್ನಬಹುದು.

ಮಂಗಳೂರಿನಲ್ಲಿ ಪಬ್‌ ಮೇಲೆ ನಡೆದ ದಾಳಿ ಅಥವಾ ಬಸ್‌ ಅಥವಾ ಸಾರ್ವಜನಿಕ ಪ್ರದೇಶವೊಂದರಲ್ಲಿ ಹುಡುಗ-ಹುಡುಗಿಯರು ಮಾತನಾಡುತ್ತಿರುವಾಗ ಅವರ ಮೇಲೆ ಹಲ್ಲೆ ನಡೆಸುವುದಾಗಲೀ ಕಾನೂನನನ್ನು ಕೈಗೆತ್ತಿಕೊಳ್ಳುವ ಕ್ರಿಯೆಯೆಂದು ಹೇಗೆ ಹೇಳುವುದು? ಪಬ್‌ ನಡೆಸುವುದಕ್ಕೆ ಸರ್ಕಾರ ಅನುಮತಿ ನೀಡಿದೆ. ಹದಿನೆಂಟು ವರ್ಷಕ್ಕೆ ಮೇಲ್ಪಟ್ಟವರಿಗೆ ಮದ್ಯವನ್ನು ಸರಬರಾಜು ಮಾಡುವುದನ್ನೂ ಕಾನೂನು ಬಾಹಿರ ಎನ್ನುವಂತಿಲ್ಲ. ವಯಸ್ಕ ಹುಡುಗ ಮತ್ತು ಹುಡುಗಿಯರು ಒಟ್ಟಿಗೆ ಕುಳಿತು ಮದ್ಯ ಸೇವಿಸುವುದನ್ನೂ ಕಾನೂನು ನಿಷೇಧಿಸಿಲ್ಲ. ಹಾಗಿರುವಾಗ ಈ ದಾಳಿಯನ್ನು `ಕಾನೂನು ಕೈಗೆತ್ತಿಕೊಳ್ಳುವುದು’ ಎಂದು ಹೇಳಲು ಸಾಧ್ಯವೇ? ಹೀಗೆ ದಾಳಿ ನಡೆಸಿ ಹಲ್ಲೆ ಮಾಡಿದರೆ ಅದು ಕಾನೂನಿನ ಉಲ್ಲಂಘನೆಯಷ್ಟೇ ಆಗಲು ಸಾಧ್ಯ. ಭಿನ್ನ ಧರ್ಮದವರು ಅಥವಾ ಜಾತಿಯವರು ಪರಸ್ಪರ ಮಾತನಾಡಬಾರದು, ಗೆಳೆಯರಾಗಬಾರದು ಎಂಬ ಯಾವ ನಿಯಮಗಳೂ ಭಾರತದಲ್ಲಿ ಇಲ್ಲ. ಇದನ್ನು ಯಾವುದಾದರೂ ಗುಂಪು ಅಥವಾ ಸಂಘಟನೆ ವಿರೋಧಿಸಿದರೆ ಅದನ್ನು `ಕಾನೂನು ಕೈಗೆತ್ತಿಕೊಳ್ಳುವುದು’ ಹೇಳುವುದು ಸರಿಯೇ?

Read more

ಸಂಪಂಗಿ ಪ್ರಕರಣದಾಚೆಗಿನ ಸತ್ಯಗಳು

Posted on February 3, 2009May 24, 2015 by admin

ಜನವರಿ 29ರಂದು ಕರ್ನಾಟಕದ ಭ್ರಷ್ಟಾಚಾರದ ಇತಿಹಾಸದಲ್ಲಿ ಮೂರು ಪ್ರಮುಖ ಘಟನೆಗಳು ಸಂಭವಿಸಿದವು. ಮೊದಲನೆಯದ್ದು ಇದೇ ಮೊದಲ ಬಾರಿಗೆ ಶಾಸಕನೊಬ್ಬ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು. ಎರಡನೆಯದ್ದು ಶುದ್ಧ ಹಸ್ತದ ರಾಜಕಾರಣಿ ಎಂದೇ ಎಲ್ಲರೂ ಗುರುತಿಸುವ ಸಿದ್ದರಾಮಯ್ಯನವರು `ಎಲ್ಲರೂ ಭ್ರಷ್ಟರೇ ದುರದೃಷ್ಟವಶಾತ್‌ ಈತ ಸಿಕ್ಕಿಬಿದ್ದಿದ್ದಾನೆ’ ಎಂದು ಇದಕ್ಕೆ ಪ್ರತಿಕ್ರಿಯಿಸಿದ್ದು. ಈ ಪ್ರತಿಕ್ರಿಯೆಗೆ 225 ಮಂದಿ ವಿಧಾನಸಭೆ ಸದಸ್ಯರು ಮತ್ತು 75 ಮಂದಿ ವಿಧಾನ ಪರಿಷತ್ತಿನ ಸದಸ್ಯರಲ್ಲಿ ಯಾರೊಬ್ಬರೂ ವಿರೋಧ ವ್ಯಕ್ತಪಡಿಸದೇ ಇದ್ದದ್ದು. ಮತ್ತು ಲೋಕಾಯುಕ್ತ ಕಚೇರಿಗೆ ಶಾಸಕರ ದಂಡೊಂದು ನುಗ್ಗಿ ಬಂಧಿತ ಶಾಸಕ ವೈ ಸಂಪಂಗಿಯನ್ನು ಜಾಮೀನಿನ ಮೇಲೆ ತಕ್ಷಣ ಬಿಡುಗಡೆ ಮಾಡಬೇಕೆಂದು ರಂಪಾಟ ನಡೆಸಿದ್ದು. ಈ ಮೂರು ಘಟನೆಗಳು ಭ್ರಷ್ಟಾಚಾರದ ಸ್ವರೂಪವನ್ನು ವಿವರಿಸುತ್ತಿವೆ.

***
ಲೋಕಾಯುಕ್ತರ ಬಲೆಗೆ ಬಿದ್ದವರು ಆಡಳಿತಾರೂಢ ಬಿಜೆಪಿಗೆ ಸೇರಿದ ಕೋಲಾರ ಜಿಲ್ಲೆ ಕೆಜಿಎಫ್‌ ಶಾಸಕ ವೈ ಸಂಪಂಗಿ. ಐದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ (ಐವತ್ತು ಸಾವಿರ ನಗದು, ಉಳಿದದ್ದು ಚೆಕ್‌) ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದರು. ಮಾನ್ಯ ಶಾಸಕರು ಈ ಮೊತ್ತ ಏಕೆ ಪಡೆಯುತ್ತಿದ್ದರು? ಲೋಕಾಯುಕ್ತ ಪೊಲೀಸರು ನೀಡುವ ಮಾಹಿತಿ ಹೀಗಿದೆ.

ಕೆಜಿಎಫ್‌ನ ಆಂಡರ್ಸನ್‌ ಪೇಟೆಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮೊಯಿನ್‌ ಫಾರೂಕ್‌ ಎಂಬವರಿಗೆ ಒಂದು ನೀವೇಶನವಿದೆ. ಇದನ್ನು ಸುಳ್ಳು ದಾಖಲೆಗಳ ಮೂಲಕ ತಮ್ಮ ವಶಕ್ಕೆ ತೆಗೆದುಕೊಳ್ಳಲು ಇಲಿಯಾಸ್‌, ನಯಾಝ್‌ ಮತ್ತು ಖಾನ್‌ ಫಯಾಝ್‌ ಪ್ರಯತ್ನಿಸಿದ್ದರು. ಇದರ ವಿರುದ್ಧ ಮೊಯಿನ್‌ ಫಾರೂಕ್‌ ಇದೇ ಠಾಣೆಯಲ್ಲಿ ದೂರು ನೀಡಲು ಹೋದಾಗ ಅದನ್ನು ಠಾಣಾಧಿಕಾರಿ ಸ್ವೀಕರಿಸಿರಲಿಲ್ಲ. ಜಿಲ್ಲಾ ಪೊಲೀಸ್‌ ವರಿಷ್ಠರು ನಿರ್ದೇಶಿಸಿದ ನಂತರ ದೂರು ದಾಖಲಿಸಿಕೊಂಡಿದ್ದರು. ಮೊಯಿನ್‌ ಫಾರೂಕ್‌ ವಿರುದ್ಧ ಇಲಿಯಾಸ್‌ ತಮ್ಮ ಪತ್ನಿಯ ಮೂಲಕ ದೂರು ಕೊಡಿಸಿದ್ದರು. ಈ ದೂರನ್ನೂ ಪಡೆದ ಪೊಲೀಸರು ಯಾರನ್ನೂ ಬಂಧಿಸುವುದಕ್ಕೆ ಹೋಗಿರಲಿಲ್ಲ.

Read more

ಅನುಕೂಲಸಿಂಧು ರಾಜಕಾರಣದ ಸಂಕೇತ

Posted on January 21, 2009May 24, 2015 by admin

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಂಕೇತಿಕವಾದ ಕ್ರಿಯೆಗಳಿಗೂ ಒಂದು ಮಹತ್ವವಿದೆ. ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿ ಖುದ್ದಾಗಿ ಪರಿಶೀಲಿಸಲು ಹೊರಡುವುದರಿಂದ ಆರಂಭಿಸಿ ರಾಜಧಾನಿಯ ಹೊರಗೆ ಸಂಪುಟ ಸಭೆ ಮತ್ತು ವಿಧಾನಸಭಾ ಅಧಿವೇಶನಗಳನ್ನು ನಡೆಸುವ ತನಕದ ಅನೇಕ ಕೆಲಸಗಳು ಈ ಸಾಂಕೇತಿಕ ಕ್ರಿಯೆಗಳ ಪರಿಧಿಯಲ್ಲಿ ಬರುತ್ತವೆ. ಚಾಮರಾಜ
ನಗರಕ್ಕೆ ಭೇಟಿ ನೀಡಿದವರೆಲ್ಲಾ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಭ್ರಮೆ ವ್ಯಾಪಕವಾಗಿರುವಾಗ ಮುಖ್ಯಮಂತ್ರಿಯೊಬ್ಬ ಚಾಮರಾಜ ನಗರಕ್ಕೆ ಭೇಟಿ ನೀಡುವುದು ನಿಜಕ್ಕೂ ಮುಖ್ಯವಾಗುತ್ತದೆ. ರಾಜಧಾನಿಯಿಂದ ದೂರವಿರುವ ಪ್ರದೇಶವೊಂದು ಅಭಿವೃದ್ಧಿಯಿಂದಲೂ ದೂರವಿದ್ದಾಗ ಅಲ್ಲೊಂದು ವಿಧಾನಸಭಾ ಅಧಿವೇಶನ ನಡೆಸುವುದು ಇಲ್ಲವೇ ಸಂಪುಟ ಸಭೆಯನ್ನು
ನಡೆಸುವುದು ಬಹಳ ಮುಖ್ಯವಾಗುತ್ತದೆ. ಸರ್ಕಾರ ತಮ್ಮ ಬಳಿಗೆ ಬಂತು ಎಂಬ ಭರವಸೆಯನ್ನು ಆ ಪ್ರದೇಶದ ಜನರಲ್ಲಿ ಮೂಡಿಸುವುದಕ್ಕೆ ಈ ಸಾಂಕೇತಿಕ ಕ್ರಿಯೆ ಸಹಾಯ ಮಾಡುತ್ತದೆ.

Read more

`ಜ್ಞಾನಾಧಾರಿತ ಆರ್ಥಿಕತೆ’ಯಲ್ಲಿ ಜ್ಞಾನದ ಪ್ರಶ್ನೆ

Posted on January 16, 2009May 24, 2015 by admin

ಜ್ಞಾನ ಸಮಾಜ, ಜ್ಞಾನಾಧಾರಿತ ಆರ್ಥಿಕತೆ ಎಂಬ ಪದಪುಂಜಗಳನ್ನು ಇತ್ತೀಚಿನ ವರ್ಷಗಳಲ್ಲಿ ಮತ್ತೆ ಮತ್ತೆ ಕೇಳುತ್ತಿದ್ದೇವೆ. ರಾಷ್ಟ್ರೀಯ ಜ್ಞಾನ ಆಯೋಗವಂತೂ ತನ್ನ ವರದಿಗೆ `ಜ್ಞಾನಾಧಾರಿತ ಸಮಾಜದತ್ತ’ ಎಂಬ ಶೀರ್ಷಿಕೆಯನ್ನು ಕೊಟ್ಟಿದೆ. ಕರ್ನಾಟಕದಲ್ಲಿ ಇತ್ತೀಚೆಗಷ್ಟೇ ಸ್ಥಾಪನೆಯಾದ ಜ್ಞಾನ ಆಯೋಗ ಕೂಡ ಜ್ಞಾನಾಧಾರಿತ ಆರ್ಥಿಕತೆಯ ಬಗ್ಗೆ, ಜ್ಞಾನ ಸಮಾಜದ ಬಗ್ಗೆ ಹೇಳುತ್ತಿದೆ. ಭಾರತವನ್ನು ಜ್ಞಾನಾಧಾರಿತ ಆರ್ಥಿಕತೆಯನ್ನಾಗಿ ಬೆಳೆಸುವುದರ ಬಗ್ಗೆ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌ ಕೂಡಾ ಹೇಳುತ್ತಾರೆ. ಇದೇ ಮಾತುಗಳನ್ನು ಹಣಕಾಸು ಸಚಿವರು ಇನ್ನಷ್ಟು ಸಂಕೀರ್ಣ ಪದಪುಂಜಗಳನ್ನು ಬಳಸಿ ವಿವರಿಸುತ್ತಾರೆ.
ಜ್ಞಾನ ಸಮಾಜದ ಕುರಿತಂತೆ ಯು.ಕೆ.ಯ ಸಸೆಕ್ಸ್‌ ವಿಶ್ವವಿದ್ಯಾಲಯದ ಸ್ಟೆಪ್ಸ್‌ ಕೇಂದ್ರ ಬೆಂಗಳೂರಿನ ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ಹಾಗೂ ಇನ್ನಿತರ ಸಂಸ್ಥೆಗಳ ಸಹಯೋಗದಲ್ಲಿ ಎರಡು ದಿನಗಳ ಕಾರ್ಯಕ್ರಮವೊಂದನ್ನು ಬೆಂಗಳೂರಿನಲ್ಲಿ ಸಂಘಟಿಸಿತ್ತು. ವಿವಿಧ ವಿಷಯಗಳ ತಜ್ಞರು `ಜ್ಞಾನ ಸಮಾಜ’ವೆಂಬ ಪರಿಕಲ್ಪನೆಯ ಸುತ್ತ ಚರ್ಚೆ ನಡೆಸಿದರು. ದೇಶ-ವಿದೇಶಗಳ ತಜ್ಞರು ಭಾಗವಹಿಸಿದ್ದ `ರೌಂಡ್‌ ಟೇಬಲ್‌’ ಪರಿಕಲ್ಪನೆಯ ಸಂಕೀರ್ಣ ಸಮಸ್ಯೆಗಳನ್ನು ಚರ್ಚಿಸಿದರೆ ಮರುದಿನ ಏರ್ಪಾಡಾಗಿದ್ದ ಸಾರ್ವಜನಿಕ ಚರ್ಚೆ ಹಿಂದಿನ ದಿನದ ಚರ್ಚೆಗಳ ಸಾರವನ್ನು ಸಾರ್ವಜನಿಕ ಮಟ್ಟದಲ್ಲಿ ಚರ್ಚಾ ವಿಷಯವನ್ನಾಗಿಸಲು ಪ್ರಯತ್ನಿಸಿತು.

ರಾಷ್ಟ್ರೀಯ ಜ್ಞಾನ ಆಯೋಗದಿಂದ ಆರಂಭಿಸಿ ರಾಜ್ಯ ಜ್ಞಾನ ಆಯೋಗದ ತನಕ, ಪ್ರಧಾನಿಯಿಂದ ಆರಂಭಿಸಿ ಮುಖ್ಯಮಂತ್ರಿಗಳ ತನಕ, ಉದ್ಯಮಿಗಳಿಂದ ಆರಂಭಿಸಿ ವಿದ್ವಾಂಸರ ತನಕ ಎಲ್ಲರೂ ಚರ್ಚಿಸುತ್ತಿರುವ ಈ `ಜ್ಞಾನ ಸಮಾಜ’ ಎಂದರೆ ಏನು? ಈ ಪ್ರಶ್ನೆಗೆ ಸದ್ಯಕ್ಕೆ ದೊರೆಯುವ ಉತ್ತರ ವಿಕಿಪಿಡಿಯಾದ ವ್ಯಾಖ್ಯೆ ಮಾತ್ರ. ಜ್ಞಾನವನ್ನು ಉತ್ಪಾದನೆಯ ಪ್ರಾಥಮಿಕ ಸಂಪನ್ಮೂಲವಾಗಿಟ್ಟುಕೊಂಡಿರುವ ಸಮಾಜವನ್ನು `ಜ್ಞಾನ ಸಮಾಜ’ ಎನ್ನಬಹುದು. `ಉತ್ಪಾದನೆಯ ಪ್ರಾಥಮಿಕ ಸಂಪನ್ಮೂಲವಾಗಿರುವ ಜ್ಞಾನ’ ಯಾವುದು? ಈ ಪ್ರಶ್ನೆಗೆ ಉತ್ತರ ಹುಡುಕಿಕೊಂಡು ಹೊರಟರೆ `ಜ್ಞಾನ ಸಮಾಜ’ವೆಂಬ ಆಧುನಿಕ ಪರಿಕಲ್ಪನೆಯ ಮಿತಿಗಳು ಅರ್ಥವಾಗತೊಡಗುತ್ತವೆ.

Read more

ಮುಖ್ಯಮಂತ್ರಿಗಳೇ ನೆನಪಿದೆಯೇ ನಿಮ್ಮ ಪ್ರಣಾಳಿಕೆ

Posted on January 16, 2009May 24, 2015 by admin

ಕರ್ನಾಟಕದ ಬಿಜೆಪಿ ಸರ್ಕಾರ ಹೆಚ್ಚು ಸುಭದ್ರವಾಗಿದೆ. ಪಕ್ಷೇತರ ಶಾಸಕರನ್ನು ಯಾರಾದರೂ ಖರೀದಿಸಿಬಿಟ್ಟರೆ ಸರ್ಕಾರ ಉರುಳಬಹುದೆಂಬ ಭಯ ಅದಕ್ಕಿಲ್ಲ. ಇನ್ನು ಮುಂದೆ ಅದಕ್ಕೆ ತಾನು ಮಾಡಿದ `ಸಂಕಲ್ಪ’ಕ್ಕೆ ತಕ್ಕಂತೆ ಕಾರ್ಯನಿರ್ವಹಿಸಲು ಯಾವ ಅಡ್ಡಿಯೂ ಇಲ್ಲ. ಆದ್ದರಿಂದ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಪಕ್ಷದ ಪ್ರಣಾಳಿಕೆಯನ್ನು ಮತ್ತೊಮ್ಮೆ ಓದಿಕೊಳ್ಳಲು ಇದು ಸಕಾಲ.

2008ರ ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಜೆಪಿ ಪ್ರಣಾಳಿಕೆಯ ಪುಟ-62ರ ಕೊನೆಯ ಸಾಲುಗಳಲ್ಲಿರುವಂತೆ `ಭ್ರಷ್ಟಾಚಾರವನ್ನು ತಡೆಗಟ್ಟುವುದು-ಲೋಕಾಯುಕ್ತವನ್ನು ಹೆಚ್ಚು ಬಲಪಡಿಸುವುದು’ ಸಮೃದ್ಧ ಕರ್ನಾಟಕಕ್ಕಾಗಿ ಬಿಜೆಪಿ ಮಾಡಿರುವ ಸಂಕಲ್ಪಗಳಲ್ಲಿ ಒಂದು. ಇಂಥದ್ದೇ ಸಂಕಲ್ಪವನ್ನು 2004ರ ಲೋಕಸಭಾ ಚುನಾವಣೆಯ ಸಂದರ್ಭದ ಪ್ರಣಾಳಿಕೆಯೂ ಮಾಡಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದ ವಿರುದ್ಧ ಯುದ್ಧ ನಡೆಸುವ ಭರವಸೆಯನ್ನು ಈ ಪ್ರಣಾಳಿಕೆ ನೀಡುತ್ತದೆ. ಆ ಸಾಲುಗಳು ಹೀಗಿವೆ: `ಭಾರತದ ಅಭಿವೃದ್ಧಿ ಪಥದ ಅತಿದೊಡ್ಡ ಅಡ್ಡಿಯೆಂದರೆ ಭ್ರಷ್ಟಾಚಾರದ ಎಂದು ಬಿಜೆಪಿ ಭಾವಿಸುತ್ತದೆ. ಭ್ರಷ್ಟಾಚಾರವು ನಮ್ಮ ಸಮಾಜ ಮತ್ತು ರಾಜಕಾರಣದ ನೈತಿಕತೆಯನ್ನೇ ದುರ್ಬಲಗೊಳಿಸಿದೆ. ಬಹುಕಾಲದ ಕಾಂಗ್ರೆಸ್‌ ಆಳ್ವಿಕೆ ಸೃಷ್ಟಿ ಮಾಡಿರುವ ಆಡಳಿತ ವ್ಯವಸ್ಥೆಯಲ್ಲಿ ಸ್ವಹಿತಕ್ಕಾಗಿ ಅಧಿಕಾರದ ದುರ್ಬಳಕೆಯೇ ಹೆಚ್ಚಾಗಿದೆ. ಲಂಚ ಕೊಡದೆ ಸರ್ಕಾರಿ ಕಚೇರಿಗಳಲ್ಲಿ ಯಾವ ಕೆಲಸವನ್ನೂ ಮಾಡಿಸಿಕೊಳ್ಳಲು ಆಗದ ತೊಂದರೆಯನ್ನು ಜನರು ಅನುಭವಿಸುತ್ತಿದ್ದಾರೆ. ಭ್ರಷ್ಟಾಚಾರವೆಂಬ ಪಿಡುಗನ್ನು ತೊಡೆಯಲು ಎಲ್ಲಾ ಹಂತಗಳಲ್ಲಿಯೂ ಹೋರಾಟ ನಡೆಸಬೇಕೆಂದು ಬಿಜೆಪಿ ಭಾವಿಸುತ್ತದೆ’.

ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಈ ಸಾಲುಗಳನ್ನು ಖಂಡಿತ ಮರೆಯಲು ಸಾಧ್ಯವಿಲ್ಲ. ಅವರು ವಿರೋಧ ಪಕ್ಷದಲ್ಲಿರುವಾಗ ಸದನದಲ್ಲಿ ಅವರು ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದ್ದನ್ನು ಕರ್ನಾಟಕ ಮರೆತಿಲ್ಲ. ಆದರೆ ಇದೇ ಯಡಿಯೂರಪ್ಪನವರ ಸರ್ಕಾರ ಇತ್ತೀಚೆಗೆ ಕೈಗೊಂಡಿದೆ ಎನ್ನಲಾದ ನಿರ್ಧಾರವೊಂದು ಪತ್ರಿಕೆಗಳ ಮೂಲಕ ಕನ್ನಡ ನಾಡಿಗೆ ತಿಳಿಯಿತು.
ಆ ಸುದ್ದಿ ಹೀಗಿದೆ.

Read more

ಶಿಕ್ಷಣ ಸಚಿವರ ಪಠ್ಯ ಬದಲಾವಣೋತ್ಸಾಹ

Posted on October 21, 2008May 24, 2015 by admin

ಮನುಷ್ಯನನ್ನು ಪ್ರಾಣಿಗಳಿಂದ ಭಿನ್ನವಾಗಿಸುವ ಮುಖ್ಯ ಲಕ್ಷಣಗಳ ಲ್ಲೊಂದು ಭಾಷೆ. ಹಾಗಿದ್ದರೆ ಪ್ರಾಣಿಗಳಿಗೆ ಭಾಷೆ ಇಲ್ಲವೇ? ಅವುಗಳೂ ತಮ್ಮದೇ ಆದ ರೀತಿಯಲ್ಲಿ ಸದ್ದುಗಳನ್ನು ಸೃಷ್ಟಿಸುವ ಮೂಲಕ ಪರಸ್ಪರ ಸಂವಹನವನ್ನು ಸಾಧಿಸುತ್ತವೆಯಲ್ಲವೇ ಎಂಬ ಪ್ರಶ್ನೆಗಳು ನಿಮ್ಮ ಮನಸ್ಸಿನಲ್ಲಿ ಮೂಡಿರಬಹುದು. ಈ ಪ್ರಶ್ನೆಗಳು ಸರಿಯಾಗಿಯೇ ಇವೆ. ಆದರೆ ಇವು ಮನುಷ್ಯನ ಭಾಷೆಯ ವೈಶಿಷ್ಟ್ಯವನ್ನು ಅರಿಯದೇ ಇರುವುದರಿಂದ ಹುಟ್ಟಿರುವ ಪ್ರಶ್ನೆಗಳು.

ಪ್ರಾಣಿಗಳ ಭಾಷೆಯೆಂದರೆ ನಿರ್ದಿಷ್ಟ ಸಂಖ್ಯೆಯ ಸಂಜ್ಞೆಗಳು ಮಾತ್ರ. ಹಸಿವಾದಾಗ ಒಂದು ಸಂಜ್ಞೆ, ಶತ್ರುವನ್ನು ನೋಡಿದಾಗ ಮತ್ತೊಂದು ಸಂಜ್ಞೆ, ಮಿಲನಕ್ಕೆ ಅಣಿಯಾಗುವುದಕ್ಕೆ ಇನ್ನೊಂದು ಸಂಜ್ಞೆ ಹೀಗೆ. ಇದನ್ನು ಒಂದು ಸರಳ ಉದಾಹರಣೆಯ ಮೂಲಕ ವಿವರಿಸಬಹುದು. ಮನೆಯ ನಾಯಿ ಅದಕ್ಕೆ ಅಸಹಜ ಎನಿಸಿದ್ದನ್ನು ಕಂಡಾಗ ಬೊಗಳುತ್ತದೆ. ಈ ಬೊಗಳುವಿಕೆಯ ತೀವ್ರತೆಯನ್ನು ಅನುಸರಿಸಿ ಅದೆಷ್ಟು ಕೋಪಗೊಂಡಿದೆ ಯೆಂದು ಊಹಿಸಬಹುದಾದರೂ ಅದು ನಿರ್ದಿಷ್ಟವಾಗಿ ಏನನ್ನು ನೋಡಿದೆ ಎಂಬುದನ್ನು ನಿರ್ಧರಿಸಲು ಸಾಧ್ಯವಿಲ್ಲ. ಲಂಗೂರ್‌ ಕೋತಿಗಳು ಕಾಡಿನಲ್ಲಿ ಹುಲಿ, ಚಿರತೆಯಂಥ ಪ್ರಾಣಿಗಳನ್ನು ಕಂಡಾಗ ಸದ್ದು ಮಾಡುತ್ತವೆ. ಈ ಸದ್ದನ್ನು ಕೇಳಿ ಅದು ಹುಲಿಯನ್ನು ನೋಡಿತೇ ಚಿರತೆಯನ್ನು ನೋಡಿತೇ ಎಂದು ನಿರ್ಧರಿಸಲಾಗದು.

ಮನುಷ್ಯನ ಭಾಷೆ ಹೀಗಲ್ಲ. ಅದು ಅನಂತ ಸಂಖ್ಯೆಯ ಅಭಿವ್ಯಕ್ತಿ ಗಳಿಗೆ ಅವಕಾಶವಿರುವ ಭಾಷೆ. ಈ ಕಾರಣದಿಂದಾಗಿಯೇ ಮನುಷ್ಯ ಪ್ರಾಣಿಗಳಿಗಿಂತ ಭಿನ್ನನಾಗುತ್ತಾನೆ. ಪ್ರಾಣಿಗಳ ಭಾಷೆ ಹುಟ್ಟಿಕೊಳ್ಳುವುದು ಅವುಗಳ ಮೆದುಳು ಬಳ್ಳಿಯಲ್ಲಿ. ಮನುಷ್ಯನ ಭಾಷೆ ಹುಟ್ಟಿಕೊಳ್ಳುವುದು ಅವನ ಮೆದುಳಿನ ಎಡ ಗೋಳಾರ್ಧದ ಮೇಲ್ಭಾಗದಲ್ಲಿ. ಮೆದುಳು ಬಳ್ಳಿಯಿಂದ ಉತ್ಪತ್ತಿಯಾಗುವ ಸಂದೇಶಗಳೆಲ್ಲವೂ ಭಾವನಾತ್ಮಕ ತುರ್ತಿನವು. ಈ ಕುರಿತಂತೆ ನಾವೆಲ್ಲರೂ ಹೈಸ್ಕೂಲ್‌ ಮಟ್ಟದ ಪಠ್ಯ ಪುಸ್ತಕಗಳಲ್ಲೇ ಓದಿರುತ್ತೇವೆ. ಪರಾವರ್ತಿತ ಪ್ರತಿಕ್ರಿಯೆಗಳು ಮೆದುಳು ಬಳ್ಳಿಯಿಂದಲೇ ಹುಟ್ಟಿಕೊಳ್ಳುತ್ತವೆ. ಉದಾಹರಣೆಗೆ ಬಿಸಿಯಾದ ಕೆಂಡವನ್ನು ಮುಟ್ಟಿದರೆ ತಕ್ಷಣ ಕೈಯನ್ನು ಹಿಂದಕ್ಕೆ ತೆಗೆದುಕೊಳ್ಳುವಂಥ ಪ್ರತಿಕ್ರಿಯೆಗಳಿವು. ಇಲ್ಲಿ ತರ್ಕ, ಕಾರಣಗಳಿಗೆ ಅವಕಾಶವಿಲ್ಲ. ಇವೆಲ್ಲಾ ತಕ್ಷಣದ ರಕ್ಷಣಾ ಕ್ರಿಯೆ ಗಳು. ಪ್ರಾಣಿಗಳ ಭಾಷೆ ಹುಟ್ಟಿಕೊಳ್ಳುವುದು ಇಂಥ ಕಾರಣಗಳಿಂದ.

Read more

ನೀಚ ಬುದ್ಧಿಯ ಬಿಡು ನಾಲಿಗೆ

Posted on October 7, 2008May 24, 2015 by admin

`ದೊಡ್ಡ ಮರವೊಂದು ಉರುಳುವಾಗ ಸುತ್ತಲಿನ ಭೂಮಿ ಅದುರುತ್ತದೆ’ ಸಾಮಾನ್ಯ ಸಂದರ್ಭದಲ್ಲಿ ಒಂದು ನಾಣ್ನುಡಿಯಷ್ಟೇ ಆಗಬಹುದಾಗಿದ್ದ ಈ ಹೇಳಿಕೆಗೆ ಕ್ರೌರ್ಯವನ್ನು ಲೇಪಿಸಿದ್ದು ಭಾರತದ ಪ್ರಧಾನಿಯಾಗಿದ್ದ ರಾಜೀವ್‌ ಗಾಂಧಿ. ಇಂದಿರಾ ಹತ್ಯೆ ನಂತರ ದಿಲ್ಲಿಯಲ್ಲಿ ನಡೆದ ಸಿಕ್ಖರ ನರಮೇಧವನ್ನು ಸಮರ್ಥಿಸಿಕೊಳ್ಳಲು ರಾಜೀವ್‌ ಈ ನಾಣ್ನುಡಿ ಬಳಸಿಕೊಂಡಿದ್ದರು.

ಖ್ಯಾತ ಭೌತ ವಿಜ್ಞಾನಿ ಐಸಾಕ್‌ ನ್ಯೂಟನ್‌ ಪ್ರತಿಪಾದಿಸಿದ ಬಲ ವಿಜ್ಞಾನದ ಸಿದ್ಧಾಂತಗಳಲ್ಲಿ ಮೂರನೆಯದ್ದು `ಪ್ರತಿಯೊಂದು ಕ್ರಿಯೆಗೂ ಒಂದು ಸಮಾನ ಮತ್ತು ವಿರುದ್ಧ ದಿಕ್ಕಿನ ಪ್ರತಿಕ್ರಿಯೆ ಇರುತ್ತದೆ’. ಭೌತಶಾಸ್ತ್ರದ ಈ ಮಹತ್ವದ ಹೇಳಿಕೆ ಗುಜರಾತ್‌ನ ಮುಖ್ಯಮಂತ್ರಿ ನರೇಂದ್ರ ಮೋದಿಯವರಿಗೆ ಗೋಧ್ರಾ ನಂತರದ ನರಮೇಧವನ್ನು ಸಮರ್ಥಿಸಿಕೊಳ್ಳುವ ಹೇಳಿಕೆಯಾಗಿಬಿಟ್ಟಿತು.ಬಲ ವಿಜ್ಞಾನದ ಇತಿಹಾಸದಲ್ಲಿ ಮಹತ್ತರವಾದ ಸ್ಥಾನವನ್ನು ಪಡೆದಿದ್ದ ಈ ಹೇಳಿಕೆ ಭಾರತದ ರಾಜಕೀಯ ಇತಿಹಾಸದಲ್ಲಿ ಒಂದು ಕ್ರೌರ್ಯಕ್ಕೆ ಸಂವಾದಿಯಾಗಿಬಿಟ್ಟಿತು.

Read more

ಕರ್ನಾಟಕ ರಾಜಕಾರಣದ ದುರಂತ ನಾಯಕರು

Posted on October 4, 2008May 24, 2015 by admin

<p>
ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸ್ಥಾನ ಆರ್‌.ವಿ.ದೇಶಪಾಂಡೆಯವರಿಗೆ ದೊರೆತಿದೆ. ಪರಿಣಾಮವಾಗಿ ಸಿದ್ದರಾಮಯ್ಯ ಬೆಂಬಲಿಗರಿಗೆ ಸಿಟ್ಟು ಬಂದಿದೆ. ಈಗವರು `ಅಹಿಂದ'ದ ಮೂಲಕ ರಣಕಹಳೆ ಮೊಳಗಿಸಲಿದ್ದಾರೆ. ಸಿದ್ದರಾಮಯ್ಯನವರೂ ಇದಕ್ಕೆ ಓಗೊಟ್ಟು ಭಾವುಕರಾಗಿ ಮಾತನಾಡುತ್ತಾರೆ. ಇದು ಈ ಹಿಂದೆಯೂ ಸಂಭವಿಸಿತ್ತು. ಆಗ ಸಿದ್ದರಾಮಯ್ಯ ಸೆಕ್ಯುಲರ್‌ ಜನತಾದಳದಲ್ಲಿದ್ದರು. ಆಗ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿ ಹೋಗಿತ್ತೆಂಬ ಅಸಮಾಧಾನವಿತ್ತು. ಅಷ್ಟು ಸಾಲದೆಂಬಂತೆ ದೇವೇಗೌಡರ ಮಗ ಎಚ್‌.ಡಿ.ಕುಮಾರಸ್ವಾಮಿ ಸರಕಾರವನ್ನು ತಮ್ಮ ಅಂಕೆಯಲ್ಲಿಟ್ಟುಕೊಳ್ಳಲು ಬೇಕಾದ ಎಲ್ಲವನ್ನೂ ಮಾಡುತ್ತಿದ್ದರು. ಇದನ್ನು ಪ್ರತಿಭಟಿಸಲು ಸಿದ್ದರಾಮಯ್ಯ `ಅಹಿಂದ' ವೇದಿಕೆ ಬಳಸಿಕೊಂಡರು. ದೇವೇಗೌಡರು ಸಿದ್ದರಾಮಯ್ಯನವರಿಗಿದ್ದ ಉಪ ಮುಖ್ಯಮಂತ್ರಿ ಹುದ್ದೆಯನ್ನೂ ಕಿತ್ತುಕೊಂಡರು.
</p>
<p>
ಈಗ ಸಿದ್ದರಾಮಯ್ಯ ಕಾಂಗ್ರೆಸ್ಸಿನಲ್ಲಿದ್ದಾರೆ. ಸೆಕ್ಯುಲರ್‌ ಜನತಾದಳದಿಂದ ದೂರವಾದ ಹೊಸತರಲ್ಲಿ ಎಲ್ಲರಿಗೂ ಕೇಳಿಸುವಂತೆ `ಅಹಿಂದ' ಜಪ ಮಾಡುತ್ತಿದ್ದ ಸಿದ್ದರಾಮಯ್ಯನವರು ಕಾಂಗ್ರೆಸ್‌ಗೆ ಹತ್ತಿರವಾಗುತ್ತಾ ಹೋದಂತೆ `ಅಹಿಂದ' ಜಪದ ಧ್ವನಿಯನ್ನು ಮೆತ್ತಗಾಗಿಸಿ ಕೊನೆಗೊಮ್ಮೆ ಮೌನ ಜಪಕ್ಕೆ ಶರಣಾಗಿಬಿಟ್ಟರು. ಈಗ ಮತ್ತೆ `ಅಹಿಂದ' ಜಪದ ಧ್ವನಿಯನ್ನು ಸಿದ್ದರಾಮಯ್ಯ ತಾರಕಕ್ಕೆ ಏರಿಸಿದ್ದಾರೆ. ಇದನ್ನು ಕೇಳಿ ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದವರೆಲ್ಲಾ ತಮ್ಮ ಕೈ ಹಿಡಿದು ಮೇಲೆತ್ತುತ್ತಾರೆ ಎಂಬ ಭಾವನೆ ಸಿದ್ಧರಾಮಯ್ಯನವರಿಗೂ ಅವರ ತಥಾಕಥಿತ ಬೆಂಬಲಿಗರಿಗೂ ಇರುವಂತೆ ಕಾಣಿಸುತ್ತದೆ.

Read more

ವಿರೋಧಿಗಳದ್ದೇ ‘ರಾಜ್ಯಭಾರ’ವಾದರೆ ಸರಕಾರವೇಕೆ?

Posted on September 23, 2008May 24, 2015 by admin

ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪನವನವರು ಅಧಿಕಾರ ಸ್ವೀಕರಿಸುವುದಕ್ಕೆ ಸರಿಯಾಗಿ ಹನ್ನೊಂದು ದಿನಗಳ ಮೊದಲು ಕರ್ನಾಟಕದಲ್ಲೊಂದು ಕಳ್ಳಭಟ್ಟಿ ದುರಂತ ಸಂಭವಿಸಿತು. ಕರ್ನಾಟಕದಲ್ಲೇ ನೂರಕ್ಕೂ ಹೆಚ್ಚು ಮಂದಿ ಬಲಿಯಾದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಯೋಜಿತ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಈ ಘಟನೆಯ ಹಿಂದೆ ತಮ್ಮ ವಿರೋಧಿಗಳ ಕೈವಾಡವನ್ನು ಸಂಶಯಿಸಿದ್ದರು. ಇದನ್ನವರು ಬೇರೆ ಬೇರೆ ರೀತಿಯಲ್ಲಿ ವ್ಯಕ್ತಪಡಿಸಿದ್ದರು. ಇದಕ್ಕೆ ತಕ್ಕಂತೆ ಸಾರಾಯಿ ನಿಷೇಧವನ್ನು ತೀವ್ರ ಟೀಕೆಗೆ ಒಳಪಡಿಸಿದ್ದ ಕಾಂಗ್ರೆಸ್‌ ನಾಯಕರಾದ ಜನಾರ್ದನ ಪೂಜಾರಿ, ವೀರಪ್ಪ ಮೊಯ್ಲಿಯವರಂಥ ಹೇಳಿಕೆಗಳೂ ಇದ್ದವು.

ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದ ಹತ್ತೇ ದಿನಗಳಲ್ಲಿ ಗೊಬ್ಬರ ಕೊರತೆಯಿಂದ ರೊಚ್ಚಿಗೆದ್ದು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗೋಲಿಬಾರ್‌ ನಡೆಯಿತು. ಗುಂಡು ತಗುಲಿದ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಈ ಸಂದರ್ಭದಲ್ಲಿಯೂ ಯಡಿಯೂರಪ್ಪನವರು ಸಂಶಯಿಸಿದ್ದು ವಿರೋಧಿ ಗಳ ಕೈವಾಡವನ್ನೇ. ಇದಕ್ಕೆ ತಕ್ಕಂತೆ ಕೇಂದ್ರ ಸರಕಾರ ಗೊಬ್ಬರ ಬಿಡುಗಡೆ ಮಾಡಿರಲಿಲ್ಲ. ಗೊಬ್ಬರದ ಲಾರಿಗಳನ್ನೇ ಹಿಡಿದು ನಿಲ್ಲಿಸುವಷ್ಟರ ಮಟ್ಟಿಗೆ ಪ್ರತಿಭಟನೆಗಳು ತೀವ್ರಗೊಂಡಿದ್ದವು. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವಷ್ಟು ಹಿಂಸಾತ್ಮಕ ಪ್ರತಿಭಟನೆಗಳೂ ನಡೆಯುತ್ತಿದ್ದವು.

ಸರಕಾರಕ್ಕೆ ನೂರು ದಿನ ತುಂಬಿದ ಕೆಲವೇ ದಿನಗಳಲ್ಲಿ ಕರ್ನಾಟಕದ ಬೇರೆ ಬೇರೆ ಕಡೆಗಳಲ್ಲಿ ಕ್ರೈಸ್ತರ ಪ್ರಾರ್ಥನಾ ಮಂದಿರಗಳ ಮೇಲೆ ತಥಾಕಥಿತ `ಹಿಂದೂ ಪರ’ ಸಂಘಟನೆಗಳು ದಾಳಿ ನಡೆಸಿದವು. ದಾವಣಗೆರೆಯಲ್ಲಿ ಆರಂಭಗೊಂಡ ಈ ದಾಳಿಯ ಸರಣಿ ಮಂಗಳೂರಿಗೆ ತಲುಪುವ ಹೊತ್ತಿಗೆ ಪಡೆದುಕೊಂಡ ಸ್ವರೂಪವೇ ಬೇರೆ. ಅಲ್ಲಿಯ ತನಕವೂ `ನ್ಯೂ ಲೈಫ್‌ ಫೆಲೋಷಿಪ್‌’ ಎಂಬ ಕ್ರೈಸ್ತ ಧರ್ಮ ಪ್ರಸಾರದ ಸಂಘಟನೆಗೆ ಸೇರಿದ ಪ್ರಾರ್ಥನಾ ಮಂದಿರಗಳ ಮೇಲೆ ನಡೆಯುತ್ತಿದ್ದ ದಾಳಿಗಳು ಕೆಥೋಲಿಕ್‌ ಕ್ರೈಸ್ತರ ಚರ್ಚ್‌ಗಳಿಗೂ ವ್ಯಾಪಿಸಿದವು. ಶಿಲುಬೆಯನ್ನು ಮುರಿಯುವ, ಯೇಸುವಿನ ಪ್ರತಿಮೆಯನ್ನು ಭಗ್ನಗೊಳಿಸುವ, ಪರಮಪ್ರಸಾದವನ್ನು ನಾಶಪಡಿಸುವ, ಗರ್ಭಿಣಿಯ ಮೇಲೆ ಹಲ್ಲೆ ಮಾಡುವ ಮಟ್ಟಕ್ಕೆ ಹೋದವು.
ಮಂಗಳೂರಿನಲ್ಲಿ ಕ್ರೈಸ್ತರು ಈ ದಾಳಿಗಳ ವಿರುದ್ಧ ಪ್ರತಿಭಟನೆ ಹಿಂಸಾತ್ಮಕ ಸ್ವರೂಪವನ್ನೂ ಪಡೆಯಿತು. ಈ ಹಿಂಸೆಗೆ ಪೊಲೀಸರೇ ಕಾರಣರು ಎಂಬ ವಾದ ಒಂದೆಡೆಗಿದ್ದರೆ ಪ್ರತಿಭಟನೆಕಾರರ ಹಿಂಸೆ ಪೊಲೀಸರನ್ನು ರೊಚ್ಚಿಗೆಬ್ಬಿಸಿತು ಎಂಬುದು ಮತ್ತೊಂದು ವಾದ. ದಕ್ಷಿಣ ಕನ್ನಡದ ಪೊಲೀಸರು ಕೋಮು ಸೂಕ್ಷ್ಮ ಪರಿಸ್ಥಿತಿಯನ್ನು ಈ ತನಕ ನಿರ್ವಹಿಸಿರುವುದನ್ನು ನೋಡಿದರೆ ತಪ್ಪು ಎರಡೂ ಕಡೆಯೂ ಇರಬಹು ದೆಂದು ಕಾಣಿಸುತ್ತದೆ. ಪರಿಸ್ಥಿತಿ ಹಿಂಸಾತ್ಮಕ ತಿರುವು ಪಡೆದುಕೊಳ್ಳುವ ವರೆಗೂ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳುವುದಿಲ್ಲ ಎಂಬುದು ಈವರೆಗಿನ ಅನೇಕ ಉದಾಹರಣೆಗಳಿಂದ ಸಾಬೀತಾಗಿದೆ.

Read more
  • Previous
  • 1
  • 2
  • 3
  • 4
  • 5
  • 6
  • 7
  • Next

Recent Posts

  • ಪ್ರಜೆಗಳನ್ನು ಬೆತ್ತಲಾಗಿಸುವ ಅಪಾರದರ್ಶಕ ಪ್ರಭುತ್ವ
  • ಇಂಟರ್‌ನೆಟ್ ಇಲ್ಲದ ಡಿಜಿಟಲ್ ಆರ್ಥಿಕತೆ!
  • ನೋಟು ರದ್ದತಿಯಲ್ಲಿ ಕಂಡ ಡಿಜಿಟಲ್ ಡಿವೈಡ್
  • ಮಾಧ್ಯಮ ನಿಯಂತ್ರಣದ ‘ಭದ್ರತಾ’ ತಂತ್ರಗಳು
  • ಒಮ್ಮುಖ ಪಾರದರ್ಶಕತೆಯ ತಂತ್ರಜ್ಞಾನಾಧಾರಿತ ಪ್ರಭುತ್ವ

Recent Comments

  • Balu on ಭಿನ್ನಮತದ ದ್ರವೀಕರಣ ಸಾಧ್ಯತೆಯು
  • ಖಿನ್ನಮತೀಯ on ಭಿನ್ನಮತದ ದ್ರವೀಕರಣ ಸಾಧ್ಯತೆಯು
  • ismail on ಉತ್ತಮ ಆಡಳಿತವೆಂಬ ಚುನಾವಣಾ ವಿಷಯ
  • --ಶ್ರೀ--- on ಉತ್ತಮ ಆಡಳಿತವೆಂಬ ಚುನಾವಣಾ ವಿಷಯ
  • ismail on ಸಂಪಂಗಿ ಪ್ರಕರಣದಾಚೆಗಿನ ಸತ್ಯಗಳು

Archives

  • December 2017
  • November 2017
  • March 2017
  • February 2017
  • January 2017
  • June 2014
  • March 2010
  • June 2009
  • May 2009
  • April 2009
  • March 2009
  • February 2009
  • January 2009
  • October 2008
  • September 2008
  • August 2008
  • July 2008
  • May 2008
  • April 2008
  • March 2008
  • February 2008
  • January 2008
  • December 2007
  • November 2007
  • September 2007
  • August 2007
  • July 2007
  • April 2007
  • January 2007
  • December 2006
  • October 2006
  • September 2006
  • May 2006

Categories

  • ಇ-ಹೊತ್ತು ಅಂಕಣ
  • ಒಂಟಿದನಿ (ಉದಯವಾಣಿ ಅಂಕಣ)
  • ಟಿಪ್ಪಣಿ
  • ಪ್ರಜಾವಾಣಿ
  • ಬಿಡಿ ಬರಹಗಳು
© 2021 Freedom of the present | ಈ ನಡುವಿನ ಬಿಡುವು | Powered by Minimalist Blog WordPress Theme